ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದು ಜಿಲ್ಲಾ ಕಾಂಗ್ರೆಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಸುದ್ದಿಯ ಮುಂದಿನ 11 ಪ್ಯಾರಾಗಳು ಕೆಳಗಿವೆ.
ಸೋನಿಯಾ ಗಾಂಧಿ ವಿರುದ್ದ ಕೇಸ್ ಯಾಕೆ?

ಪಿಎಂ ಕೇರ್ಸ್ ಫಂಡ್ ಪ್ರಧಾನಿ ಅವರ ವೈಯಕ್ತಿಕ ಕೇರ್ ಫಂಡ್ ಆಗಿದೆ. ಈ ಹಣವನ್ನು ಸದುಪಯೋಗ ಮಾಡುತ್ತಿಲ್ಲ ಎಂದು INC India ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಾಗಿದೆ. ಹಾಗಾಗಿ ಸಾಗರದ ವಕೀಲ ಪ್ರವೀಣ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿರುವುದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಗರಂ
ಇನ್ನು, ಸೋನಿಯಾ ಗಾಂಧಿ ಅವರ ವಿರುದ್ಧ ಎಫ್ಐಅರ್ ದಾಖಲಾಗಿರುವುದು ತಿಳಿಯುತ್ತಿದ್ದಂತೆ, ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಪ್ರಸನ್ನಕುಮಾರ್ ಸೇರಿದಂತೆ ಹಲವು ಮುಖಂಡರು ಜಿಲ್ಲಾ ಪೊಲೀಸ್ ಕಚೇರಿಗೆ ತೆರಳಿ, ಎಫ್ಐಆರ್ ರದ್ದುಗೊಳಿಸಬೇಕು, ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಡಿಸಿ ಕಚೇರಿ ಮುಂದೆ ಪ್ರತಿಭಟನೆ
ಮತ್ತೊಂದೆಡೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಎಫ್ಐಆರ್ ರದ್ಧತಿ ಮತ್ತು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಅಲ್ಲದೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಸಾಗರದಲ್ಲೂ ಕಾಂಗ್ರೆಸಿಗರ ಆಕ್ರೋಶ
ಮತ್ತೊಂದೆಡೆ ಸಾಗರದಲ್ಲೂ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷದವರ ಟೀಕೆಯನ್ನು ವೈಯಕ್ತಿಕ ಎಂದು ಭಾವಿಸಿ ದೂರು ದಾಖಲು ಮಾಡಲಾಗಿದೆ. ಇದು ಆಡಳಿತ ಪಕ್ಷವನ್ನು ಟೀಕಿಸುವ ಹಕ್ಕನ್ನೆ ಪ್ರಶ್ನೆ ಮಾಡಿದಂತಿದೆ. ಹಾಗಾಗಿ ಎಫ್ಐಆರ್ ರದ್ದುಗೊಳಿಸಬೇಕು ಎಂದು ಸಾಗರ ಕಾಂಗ್ರೆಸ್ ಮುಖಂಡರು ಒತ್ತಾಯಿಸಿ, ಸಾಗರ ಡಿವೈಎಸ್ಪಿಗೆ ಮನವಿ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com