ಶಿವಮೊಗ್ಗ: ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ (Kerala) ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟೈರ್ಗೆ ಬೆಂಕಿ ಹಚ್ಚಿ, ಕಪ್ಪುಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕಲಿಕೆಯ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮವು ಸರ್ವಾಧಿಕಾರಿ ಧೋರಣೆಯಾಗಿದೆ. ಕಾಸರಗೋಡಿನಲ್ಲಿ ಸುಮಾರು 210 ಕನ್ನಡ ಶಾಲೆಗಳಿವೆ. 7.5 ಲಕ್ಷಕ್ಕೂ ಹೆಚ್ಚು ಕನ್ನಡಿಗರು ವಾಸಿಸುತ್ತಿದ್ದಾರೆ. ಮಲೆಯಾಳಂ ಭಾಷಾ ಮಸೂದೆಯನ್ನು ವಿಧಾನಸಭೆಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಜಾರಿಗೆ ತರುತ್ತಿರುವುದು ಕನ್ನಡ ಶಾಲೆಗಳನ್ನು ಮುಚ್ಚುವ ಪಿತೂರಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.


ಪ್ರತಿಭಟನೆಯಲ್ಲಿ ಪ್ರಮುಖರಾದ ಕಲ್ಲೂರು ಮೇಘರಾಜ್, ಶಂಕ್ರಾನಾಯ್ಕ, ಎಸ್.ಬಿ. ಶಿವಣ್ಣ, ರಘುನಾಥ್ ಅರಸಾಳು, ಅಲೀಂಖಾನ್, ಟಿ.ಹೆಚ್. ಬಾಬು, ಜಗದೀಶ್ ಕೆ.ಜಿ., ಈಶ್ವರ್, ಹಯಾತ್ಪಾಬ್, ರೋಷನ್ ಬೇಗ್, ಜನಮೇಜಿರಾವ್ ಸೇರಿದಂತೆ ಹಲವರು ಇದ್ದರು.