SHIVAMOGGA LIVE NEWS | 6 ಮಾರ್ಚ್ 2022
ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಮತ್ತು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಏರ್ ಪೋರ್ಟ್’ಗೆ ಹಿರಿಯರು ಸೂಚಿಸಿದ ಹೆಸರು
ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ನಾಡಿನ ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವ ಪ್ರಯತ್ನವಾಗಿದೆ. ಪೂಜ್ಯರ ಆಶೀರ್ವಾದ ಇದ್ದಾಗ ಮತ್ತಷ್ಟು ಕೆಲಸ ಮಾಡುವ ಶಕ್ತಿ ಬರಲಿದೆ ಎಂದರು.
ಕೆಳದಿ ಶಿವಪ್ಪನಾಯಕ ಅವರು ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದರು. ಆದ್ದರಿಂದ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯಕ್ಕೆ ಆವರ ಹೆಸರು ಇಡಲಾಗಿದೆ. ಇನ್ನು ನಾಲ್ಕೈದು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದು ಯಾವ ಹೆಸರು ಸೂಚಿಸುತ್ತಾರೋ ಅದೆ ಹೆಸರು ಇಡುವಂತೆ ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುತ್ತೇನೆ ಎಂದರು.
ಸರ್ವ ಜನರಿಗೆ ಅನುಕೂಲ
ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಾತನಾಡಿ, ಕೆಳದಿ ಅರಸರಲ್ಲಿ ಶಿವಪ್ಪನಾಯಕ ಅವರು ಹೆಚ್ಚು ಜನಜನಿತವಾಗಿದ್ದರು. ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಿದ್ದರು. ಅವರ ಹೆಸರಿನ ಪ್ರಶಸ್ತಿಯನ್ನು ಯಡಿಯೂರಪ್ಪ ಅವರಿಗೆ ನೀಡಲಾಗುತ್ತಿದೆ. ಅವರ ಆಡಳಿತಾವಧಿಯಲ್ಲಿ ಕೃಷಿ ಬಜೆಟ್ ಮಂಡಿಸಿ, ಸರ್ವ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಪ್ರಶಂಸೆಗೆ ಮೀರಿದ ವ್ಯಕ್ತಿ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ, ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಮಾತನಾಡಿ, ಯಡಿಯೂರಪ್ಪ ಅವರು ಪ್ರಶಂಸೆಯನ್ನು ಮೀರಿದ ವ್ಯಕ್ತಿ. ಬದುಕಿನ ಧ್ಯೇಯ ಕುರಿತು ವಿಚಾರ ಮಾಡಬೇಕು, ಅಳವಡಿಸಿಕೊಂಡು ಬದುಕುವುದೆ ಅವರಿಗೆ ಮಾಡಿದ ಪ್ರಶಂಸೆ. ಮೈತುಂಬ ಗಾಯ, ನೋವುಗಳನ್ನು ಅನುಭವಿಸಿ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದ್ದಾರೆ ಯಡಿಯೂರಪ್ಪ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ, ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್ ಸೇರಿದಂತೆ ಹಲವರು ಇದ್ದರು.
ಈ ಮೇಲ್ – [email protected]
WhatsApp Number – 7411700200