SHIVAMOGGA LIVE NEWS | 22 JANUARY 2024
SHIMOGA : ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದಾರೆ. ಇದರಿಂದ ಶಿವಮೊಗ್ಗದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕೆಲಕಾಲ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಆಕೆ ಮಾನಸಿಕ ಅಸ್ವಸ್ಥೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದರು. ಲಡ್ಡು ಹಂಚುತ್ತಿದ್ದರು. ಈ ಸಂದರ್ಭ ಅಲ್ಲಿಗೆ ಬಂದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಹಿಂದೂಪರ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮಹಿಳೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದರು. ಮಧ್ಯಪ್ರವೇಶಿಸಿದ ಕೆ.ಈ.ಕಾಂತೇಶ್, ಮಹಿಳೆಯನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದರು.
ಬಿಜೆಪಿ ಮುಖಂಡರ ಆಕ್ರೋಶ
ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಮಹಿಳೆ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯನ್ನು ಬಂಧಿಸುವಂತೆ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಹಿಳೆಯನ್ನು ಬಂಧಿಸಿ ಆಕೆಯ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ರಾಮ ಮಂದಿರದ ಸಂಭ್ರಮಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ್ದೇಕೆ. ಇದರ ಹಿಂದೆ ಷಡ್ಯಂತ್ರವಿದೆಯೆ ಎಂದು ತನಿಖೆಯಾಗಬೇಕು ಎಂದು ಆಗ್ರಹಿಸಿದರು.
‘ಮಾನಸಿಕ ಅಸ್ವಸ್ಥೆ’, ದಾಖಲೆ ಬಿಡುಗಡೆ
ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿಚಾರಣೆ ವೇಳೆ ಮಹಿಳೆ ಮಾನಸಿಕ ಅಸ್ವಸ್ಥಳೆಂದು ತಿಳಿದು ಬಂದಿದೆ. ಈ ಸಂಬಂಧ ಅವರ ತಂದೆ ಪೂರಕ ದಾಖಲೆ ಒದಗಿಸಿದ್ದಾರೆ. ಎಲ್ಲಾ ಆಯಾಮಗಳಿಂದಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ ಆಕೆ ಶಿವಮೊಗ್ಗದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.

ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್, ಇನ್ನು ಹತ್ತು ದಿನದಲ್ಲಿ ಪಟ್ಟಿ ರಿಲೀಸ್ಗೆ ಎಐಸಿಸಿ ಉಸ್ತುವಾರಿ ಸೂಚನೆ
ಇನ್ನು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಿಳೆಯ ತಂದೆ ಸಯ್ಯದ್ ಅಬ್ಬಾಸ್, ತಮ್ಮ ಮಗಳು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿಲ್ಲ. ಆಕೆ ಮೊದಲಿನಿಂದಲು ಸ್ವಲ್ಪ ಮಾನಸಿಕ ಅಸ್ವಸ್ಥಳಾಗಿದ್ದಾಳೆ. ಈ ಸಂಬಂಧ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಆಕೆ ಕೆಲಸ ಮಾಡುತ್ತಿದ್ದಳು ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಏಜೆನ್ಸಿಯಲ್ಲಿ ನಕಲಿ ಗುಡ್ ನೈಟ್ | ರೈಲಿನಲ್ಲಿ ಅನಾಥವಾಗಿತ್ತು ಐ ವಾಚ್ – ಫಟಾಫಟ್ ಕ್ರೈಮ್ ನ್ಯೂಸ್
ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ನಗರದಲ್ಲಿ ಅಹಿತಕರ ಘಟನೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದರೆ ಬುರ್ಖಾ ಧರಿಸಿದ್ದ ಮಹಿಳೆ ಘೋಷಣೆ ಕೂಗಿದ ವಿಚಾರ ಗೊಂದಲ ಮೂಡಿಸಿತ್ತು.