ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ರಾಘವೇಂದ್ರ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ (79 ಕಿ.ಮೀ.) ಯೋಜನೆಗಳು ಸದ್ಯಕ್ಕೆ ರದ್ದುಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯೋಜನೆ ಸ್ಥಗಿತಕ್ಕೆ ಕಾರಣವೇನು?
ಈ ಹೊಸ ಮಾರ್ಗಗಳು ಜಾರಿಗೊಳ್ಳಲು ಪದೇಪದೆ ಕೇಂದ್ರಕ್ಕೆ ಪತ್ರ ಬರೆದು, ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗಿತ್ತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ವೆಚ್ಚ ಹಂಚಿಕೆ ಆಧಾರದ ಮೇಲೆ ಮಂಜೂರಾಗಿದ್ದ ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಯೋಜನೆ ಸದ್ಯಕ್ಕೆ ಸ್ಥಗಿತಗೊಂಡಿದೆ.
ರಾಜ್ಯ ಸರ್ಕಾರ ಯೋಜನೆಗೆ ಅಗತ್ಯವಿರುವ 559 ಹೆಕ್ಟೇರ್ನಲ್ಲಿ 226 ಹೆಕ್ಟೇರ್ ಮಾತ್ರ ಸ್ವಾಧೀನ ಪಡಿಸಿಕೊಂಡಿದೆ. ಇನ್ನೂ 333 ಹೆಕ್ಟೇರ್ ಸ್ವಾಧೀನ ಬಾಕಿ ಇದೆ. ಒಟ್ಟು 488 ಹೆಕ್ಟೇರ್ ಭೂಮಿ ಅಗತ್ಯವಿದ್ದ ಶಿವಮೊಗ್ಗ-ಹರಿಹರ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದಿದ್ದುದು ಕಾರಣ ಎಂದಿದ್ದಾರೆ.

ರಾಜ್ಯದ ರೈಲ್ವೆ ಯೋಜನೆಗೆ ಹೆಚ್ಚು ಅನುದಾನ
ಸಂಸತ್ತಿನಲ್ಲಿ ತಾವು ಕೇಳಿದ ಪ್ರಶ್ನೆಗೆ ರೈಲ್ವೆ ಸಚಿವಾಲಯ ನೀಡಿದ ಪ್ರತಿಕ್ರಿಯೆಯನ್ನು ಸಂಸದ ರಾಘವೇಂದ್ರ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಮತ್ತು ಸುರಕ್ಷತಾ ಕಾರ್ಯಗಳಿಗೆ ಕೇಂದ್ರದ ಅನುದಾನ ಹಂಚಿಕೆಯಲ್ಲಿ ಭಾರೀ ಹೆಚ್ಚಳವಾಗಿದೆ. 2009 ರಿಂದ 2014ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ನೀಡಲಾಗುತ್ತಿದ್ದ ವಾರ್ಷಿಕ ಸರಾಸರಿ ₹835 ಕೋಟಿ. 2025-26ರಲ್ಲಿ ಈ ಅನುದಾನವು ₹7,564 ಕೋಟಿಗೆ ಏರಿಕೆಯಾಗಿದೆ. ಯುಪಿಎ ಅವಧಿಗೆ ಹೋಲಿಸಿದರೆ ಒಂಬತ್ತು ಪಟ್ಟುಗಿಂತಲೂ ಅಧಿಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ರಾಜ್ಯದಲ್ಲಿ ಒಟ್ಟು ₹42,517 ಕೋಟಿ ವೆಚ್ಚದಲ್ಲಿ, ಒಟ್ಟು 3,264 ಕಿ.ಮೀ.ಗಳ 25 ಪ್ರಮುಖ ಯೋಜನೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಹೊಸ ಮಾರ್ಗಗಳು ಮತ್ತು ದ್ವಿಮುಖ ಮಾರ್ಗಗಳಿವೆ. ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾಳಜಿ ಮತ್ತು ದೂರದೃಷ್ಟಿಗೆ ಸಾಕ್ಷಿ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ » ಡೆವಿಲ್ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು
ರಾಜ್ಯ ಸರ್ಕಾರ ಬಾಕಿ ಇರುವ 3,341 ಹೆಕ್ಟೇರ್ ಭೂಸ್ವಾಧೀನವನ್ನು ಪೂರ್ಣಗೊಳಿಸಬೇಕು. ಈ ವಿಳಂಬವೇ ಯೋಜನೆಗಳ ಸ್ಥಗಿತಕ್ಕೆ ಮೂಲ ಕಾರಣ. ಶಿವಮೊಗ್ಗ ಮಾತ್ರವಲ್ಲದೆ, ರಾಜ್ಯದ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಂಸದ ರಾಘವೇಂದ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.