Published On: 11 October 2025
ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು.

ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ
ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ ಆರೈಕೆ ನೀಡಲಾಗುತ್ತಿದೆ. ಅಲ್ಲಿಗೆ ಹೋದಾಗ ನನಗೆ ಕಣ್ಣೀರು ಬಂತು. ಶಿಕ್ಷಕ ಕುಮಾರ್ ಅವರು ತಮ್ಮ ಜೀವನವನ್ನೆ ಆ ಮಕ್ಕಳಿಗಾಗಿ ಮೀಸಲಿಟ್ಟಿದ್ದಾರೆ. ಇಂತಹ ಮಕ್ಕಳ ಆರೈಕೆಗಾಗಿ ಅಲ್ಲಿ ವಸತಿ ಶಾಲೆ ತೆರೆಯುವ ಉದ್ದೇಶವಿದೆ.
ಡಿಡಿಪಿಐ ಅವರು ಈಗಾಗಲೆ ಜಾಗ ಗುರುತಿಸಿದ್ದಾರೆ. ಇನ್ನು ಶಿಕ್ಷಕ ಕುಮಾರ್ ಅವರ ಸೇವಾವಧಿ ಡಿಸೆಂಬರ್ಗೆ ಮುಗಿಯಲಿದೆ. ಅವರ ಸೇವಾವಧಿ ವಿಸ್ತರಣೆ ಆಗಬೇಕಿದ್ದರೆ ಸಂಪುಟದಲ್ಲಿ ತೀರ್ಮಾನ ಆಗಬೇಕು. ಆ ಪ್ರಕ್ರಿಯೆ ನಡೆಯಲಿದೆ.

ಕ್ಯಾನ್ಸರ್ ಬಾಧಿತ ಮಕ್ಕಳಿಗೆ ವಸತಿ ಶಾಲೆ
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಶಾಲೆ ತೆರೆಯುವ ಉದ್ದೇಶ ಇದೆ. ಕ್ಯಾನ್ಸರ್ ಗುಣ ಮಾಡಬಹುದಾದ ಕಾಯಿಲೆ. ನಟ ಶಿವರಾಜ ಕುಮಾರ್ ಸೇರಿ ಹಲವರು ಇದಕ್ಕೆ ಉದಾಹರಣೆ. ಇಂತಹ ಮಕ್ಕಳಿಗೆ ಒಂದರಿಂದ ಹತ್ತನೆ ತರಗತಿವರೆಗೆ ವಸತಿ ಶಾಲೆ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಸರ್ಕಾರೇತರ ಸಂಸ್ಥೆ ಮುಂದೆ ಬಂದಿದೆ. ಕಿದ್ವಾಯಿ ಬಳಿ ಶಾಲೆ ಆರಂಭಿಸಲಾಗುತ್ತದೆ.
ಉದ್ಯಮಿಗಳಾದ ಅಜೀಂ ಪ್ರೇಮ್ಜಿ, ಸುಧಾ ಮೂರ್ತಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿ ಆ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣ ಲಭ್ಯವಾಗಲಿದೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ ಉಪಸ್ಥಿತರಿದ್ದರು.