ರಾಜ್ಯದ ವಿವಿಧೆಡೆ ರೈತರ ಜಮೀನು, ಮಠ, ಮಂದಿರಗಳ ಆಸ್ತಿಯನ್ನು ವಕ್ಫ್ ಸ್ವತ್ತು ಎಂದು ನೊಟೀಸ್ ನೀಡಲಾಗಿದೆ. ಇದರ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ, ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ವಿರುದ್ಧ ಘೋಷಣೆ ಕೂಗಿದರು.
ಡಿಸಿ ಕಚೇರಿಗೆ ಮುತ್ತಿಗೆ ಯತ್ನ
ಪ್ರತಿಭಟನಾ ಸಭೆ ಬಳಿಕ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪೊಲೀಸರು ಬ್ಯಾರಿಕೇಡ್ ಹಾಕಿ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದರು. ಆದರೆ ಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಕಚೇರಿ ಬಾಗಿಲು ಹಾಕಿ ಬಿಜೆಪಿ ಕಾರ್ಯಕರ್ತರು ಒಳ ನುಗ್ಗದಂತೆ ತಡೆದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಎಂಎಲ್ಎ ಸೇರಿ ಹಲವರು ವಶಕ್ಕೆ
ಈ ಸಂದರ್ಭ ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಉಳಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮುಂದುವರೆಸಿದ್ದರು. ಪೊಲೀಸರು ಪ್ರತಿಭಟನಾಕಾರರನ್ನು ಸಮಧಾನಪಡಿಸಿದರು.

ಇದನ್ನೂ ಓದಿ » ಶುರುವಾಯ್ತು ಹೋರಿ ಹಬ್ಬದ ಕ್ರೇಜ್, ಈ ಬಾರಿ ಹೇಗಿದೆ ಉತ್ಸಾಹ?



