ಶಿವಮೊಗ್ಗ: ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದೆ. ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಅಬ್ಬರಿಸುತ್ತಿದ್ದು, ಇವತ್ತೂ ಭಾರಿ ಮಳೆ, ತೀವ್ರ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.
ನೆರೆ ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ದಾವಣಗೆರೆಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಿರುವ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 7 ಮತ್ತು 8 ರಂದು ಕೆಲವು ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ಭಾರಿ ಮಳೆ ಆಗುವ ಸಾದ್ಯತೆ ಇದೆ. ಇನ್ನೂ ಕೆಲವೆಡೆ 115.5 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಅಲರ್ಟ್ ನೀಡಲಾಗಿದೆ.
ಘಟ್ಟ ಪ್ರದೇಶದಲ್ಲಿ ಭೂಕುಸಿತದ ಆತಂಕ
ಮಳೆಯ ಆರ್ಭಟ ಹೆಚ್ಚಿರುವುದರಿಂದ ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಜುಲೈ 7 ರಿಂದ 11 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಮಲೆನಾಡು ಹಾಗೂ ಘಾಟಿ ರಸ್ತೆಗಳ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರು ಮತ್ತು ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.