ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020
ಲಾಕ್ ಡೌನ್ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಧಿಸಿರುವ ನಿಯಮಗಳನ್ನು ಹೊರತುಪಡಿಸಿ, ತಾಲೂಕು ಆಡಳಿತ ಹೊಸ ನಿಯಮಗಳನ್ನು ಜಾರಿಗೊಳಿಸುವುದು ಬೇಡ ಎಂದು ಶಾಸಕ ಹರತಾಳು ಹಾಲಪ್ಪ ಸೂಚಿಸಿದ್ದಾರೆ.
ಕೋವಿಡ್ 19 ನಿಯಂತ್ರಣ ಕುರಿತು ಸಾಗರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕರೆಯಾಗಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಹಾಲಪ್ಪ, ತಾಲೂಕು ಆಡಳಿತದ ವತಿಯಿಂದ ಹೊಸ ನಿಯಮ ಜಾರಿಗೊಳಿಸುವುದು ಬೇಡ. ಇದರಿಂದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ಟಾಸ್ಕ್ ಫೋರ್ಸ್ ಕ್ರಿಯಾಶೀಲಗೊಳಿಸಿ
ಕರೋನ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಆದರೆ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಇರುವುದರಿಂದ, ಟಾಸ್ಕ್ ಫೋರ್ಸ್ಗಳು ಕ್ರಿಯಾಶೀಲವಾಗುವುದು ಕಷ್ಟವಾಗಬಹುದು. ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಆಡಳಿತಾಧಿಕಾರಿಗಳ ಸಭೆ ಕರೆದು, ಟಾಸ್ಕ್ ಫೋರ್ಸ್ಗಳನ್ನು ಕ್ರಿಯಾಶೀಲಗೊಳಿಸಬೇಕು ಎಂದು ಸೂಚಿಸಿದರು.
ಸಾಗರ ಆಸ್ಪತ್ರೆಯಲ್ಲಿ 150 ಬೆಡ್
ಇದೇ ವೇಳೆ ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ನಾಗರಾಜ್, ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರೋನ ಚಿಕಿತ್ಸೆಗೆ 150 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಕರೋನಾಗೆ ಸಂಬಂಧಿಸಿದ ಸಣ್ಣಪುಟ್ಟ ಚಿಕಿತ್ಸೆಯನ್ನು ಇಲ್ಲಿ ನೀಡಲಾಗುತ್ತದೆ. ಗಂಭೀರ ಪ್ರಕರಣಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್, ಡಿವೈಎಸ್ಪಿ ವಿನಾಯಕ ಸೆಟ್ಟಿಗಾರ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]