SHIVAMOGGA LIVE NEWS | 26 AUGUST 2023
SHIMOGA : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ಆರಂಭಿಸಿದೆ. ಈ ಹಿನ್ನೆಲೆ ಆಯನೂರು ಮಂಜುನಾಥ್ ಮತ್ತು ಶಿಕಾರಿಪುರದ ನಾಗರಾಜ ಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇಬ್ಬರು ನಾಯಕರು ತಮ್ಮ ಸಂಗಡಿಗರೊಂದಿಗೆ ಶಿವಮೊಗ್ಗದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಆಯನೂರು ಮಂಜುನಾಥ್ ತಮ್ಮ ಸಂಗಡಿಗರೊಂದಿಗೆ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಮಂಗಳವಾರ ಶಿಕಾರಿಪುರದ ನಾಗರಾಜ ಗೌಡ ಅವರು ತಮ್ಮ ಸಂಗಡಿಗರ ಜೊತೆಗೆ ಸದಸ್ಯತ್ವ ಪಡೆಯಲಿದ್ದಾರೆ ಎಂದು ತಿಳಿಸಿದರು.
ಪಕ್ಷದ ಚೌಕಟ್ಟಿನಲ್ಲಿ ಎಲ್ಲವು ಸರಿ ಮಾಡ್ತೀವಿ
ಆಯನೂರು ಮಂಜುನಾಥ್ ಅವರ ಸೇರ್ಪಡೆಗೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಚರ್ಚೆ ನಡೆಸುತ್ತೇವೆ. ಪಕ್ಷದ ಚೌಕಟ್ಟಿನಲ್ಲಿ ಅದನ್ನು ಪರಿಹರಿಸುತ್ತೇವೆ. ಇನ್ನು, ನಾಗರಾಜ ಗೌಡ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಆದರೆ ಪಕ್ಷದ ಹಿತದೃಷ್ಟಿಯಿಂದ ಆದೇಶ ಹಿಂಪಡೆಯಲಾಗಿದೆ. ಎಲ್ಲರು ಒಗ್ಗಟ್ಟಿನಿಂದ ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲಿದ್ದೇವೆ ಎಂದು ತಿಳಿಸಿದರು.
15 ಗ್ಯಾರಂಟಿ ಯೋಜನೆಗಳಿವೆ
ಸರ್ಕಾರ ರಚನೆಯಾಗಿ ಎರಡೂವರೆ ತಿಂಗಳಿನಲ್ಲಿ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆ ಮೂಲಕ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆ ಮೂಲಕ ಹೆಚ್ಚುವರಿ ಅಕ್ಕಿ ವಿತರಣೆ ಭರವಸೆಗಳನ್ನು ಈಡೇರಿಸಿದ್ದೇವೆ. ಆ.28ರಂದು ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ಕೋಟ್ಯಂತರ ಮಂದಿ ಇವುಗಳ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಸಂದರ್ಭ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೆವು. ಆದರೆ 15 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದೇವೆ. ಪ್ರೌಢಶಾಲೆ ಮಕ್ಕಳಿಗು ಬಾಳೆಹಣ್ಣು, ಶೇಂಗಾ ಚಿಕ್ಕಿ, ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಸದ್ಯದಲ್ಲೆ ಮನೆ ಬಾಗಿಲಿಗೆ ವೈದ್ಯರು ಯೋಜನೆ ಜಾರಿಗೆ ಬರಲಿದೆ ಎಂದು ಸುಂದರೇಶ್ ತಿಳಿಸಿದರು.
