SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ಸರಿ ಇದೆ. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಿವಮೊಗ್ಗಕ್ಕೆ ಆಗಮಿಸಿದ ವೇಳೆ ಹೆಲಿಪ್ಯಾಡ್’ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ಕ್ಲಿಪಿಂಗ್’ಗಳನ್ನು ಪರಿಶೀಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಈಗಾಗಲೇ ಪೊಲೀಸ್ ಇಲಾಖೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ ಹಿಂದೆ ಡಿಜೆ ಹಳ್ಳಿಯಲ್ಲಿ ಆದ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಗಲಭೆಯಲ್ಲಿ ಆದ ಹಾನಿಯನ್ನು ತಪ್ಪಿತಸ್ಥರಿಂದಲೇ ವಶಪಡಿಸಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ಅದರಂತೆ ರಿಕವರಿ ಕಮೀಶನ್ ನೇಮಿಸಲಾಗಿದೆ ಎಂದರು.
ಬುಲ್ಡೋಜರ್ ಮಾದರಿ
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತೆ ಬುಲ್ಡೋಜಾರ್ ಮಾದರಿ ಕರ್ನಾಟಕದಲ್ಲೂ ಜಾರಿಯಾಗಬೇಕು ಎಂದು ನಿಮ್ಮ ಸಂಪುಟದ ಸಚಿವರೇ ಹೇಳುತ್ತಿದ್ದಾರೆ. ಬುಲ್ಡೋಜಾರ್ ಎಂದರೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಯಾವ ಯಾವ ಸ್ಥಳದಲ್ಲಿ ಪರಿಸ್ಥಿತಿ ಏನಿರುತ್ತದೋ ಅದಕ್ಕೆ ಅನುಗುಣವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಇದರ ಜೊತೆಗೆ ನ್ಯಾಯಾಲಯದ ಆದೇಶಗಳನ್ನು ಕೂಡ ಪರಿಪಾಲಿಸಬೇಕು ಎಂದರು.
ಪಂಚಮಸಾಲಿ ಮೀಸಲಾತಿ
ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಸ್ವಾಮೀಜಿಗಳು ನೀಡಿದ್ದ ಗಡುವು ಮುಗಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಷಯ ಹಿಂದುಳಿದ ವರ್ಗಗಳ ಆಯೋಗದ ಮುಂದಿದೆ. ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ನಿಧಿ ಸಂಗ್ರಹಿಸುತ್ತಿರುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಯಾವ ಸಂಘಟನೆಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಇದಕ್ಕೂ ನಮಗೂ ಸಂಬಂಧವಿಲ್ಲ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಪರಿಷತ್ ಸದಸ್ಯ ಡಿ.ಎಸ್.ಅರುಣ್, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಕೆಎಸ್ಎಸ್ಐಡಿಸಿ ಉಪಾಧ್ಯಕ್ಷ ಎಸ್.ದತ್ತಾತ್ರಿ, ಸಿಎಂ ಅಪ್ತ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರ ಕಾಶ್ ಮತ್ತಿತರರು ಇದ್ದರು.
ಇದನ್ನೂ ಓದಿ |ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
CHIEF MINISTER
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200