SHIVAMOGGA LIVE NEWS | 27 NOVEMBER 2022
ಶಿವಮೊಗ್ಗ | ಶರಾವತಿ ಸಂತ್ರಸ್ಥರ ಆತಂಕ ನಿವಾರಣೆಗಾಗಿ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ ಅವರು, ಶರಾವತಿ ಸಂತ್ರಸ್ಥರಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಸರವಾದಿಯೊಬ್ಬರ ಅರ್ಜಿಗೆ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರ ಈತನಕ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ಆರೋಪಿಸಿದರು.
ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದಾಗ ಹಕ್ಕುಪತ್ರ ಕೊಡಿಸಿದ್ದರು. ಆದರೆ ಆ ಹಕ್ಕುಪತ್ರವನ್ನು ತಿರಸ್ಕರಿಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯಾರಿಗೂ ಹಕ್ಕುಪತ್ರ ಕೊಡಿಸಲಿಲ್ಲ. ಈಗ ಶರಾವತಿ ಸಂತ್ರಸ್ಥರು ನೆಲೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು.
ಕಬಿನಿ ಜಲಾಶಯ ನಿರ್ಮಾಣವಾದಾಗ 35 ಸಾವಿರ ಜನ ಸಂತ್ರಸ್ಥರಾದರು. ಅವರಿಗೆ ಪರಿಹಾರ ನೀಡಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಮಾದರಿ ಗ್ರಾಮಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಹಕ್ಕುಪತ್ರವನ್ನೆ ಕೊಡಲಿ ಸಾದ್ಯವಾಗಿಲ್ಲ. ಬಿಜೆಪಿ ಸರ್ಕಾರಕ್ಕೆ ರೈತರ ಬಗ್ಗೆ ಮಾತನಾಡಲು ಹಕ್ಕು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಮಧು ಬಂಗಾರಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.