ಶಿವಮೊಗ್ಗ: ‘ನರೇಂದ್ರ ಮೋದಿ ಅವರು ದೇಶದ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಅತಿಹೆಚ್ಚು ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ದೇಶದ 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಲಜೀವನ್ ಮಿಷನ್ ಅಡಿಯಲ್ಲಿ 15 ಕೋಟಿ ಮನೆಗಳಿಗೆ ಕುಡಿಯುವ ನೀರು ಹಾಗೂ ಗರೀಬ್ ಕಲ್ಯಾಣ್ ಯೋಜನೆ ಮೂಲಕ 80 ಕೋಟಿ ಜನರಿಗೆ ಉಚಿತ ರೇಷನ್ ಒದಗಿಸಲಾಗಿದೆ’ ಎಂದು ವಿವರಿಸಿದರು.

ಮಲೆನಾಡಿಗೆ ₹22,000 ಕೋಟಿ ಅನುದಾನ
‘ಕೇಂದ್ರ ಸರ್ಕಾರವು ಮಲೆನಾಡು ಭಾಗದ ರೈಲ್ವೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸುಮಾರು ₹22,000 ಕೋಟಿ ಅನುದಾನ ನೀಡಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ₹990 ಕೋಟಿ ವೆಚ್ಚ ಮಾಡಲಾಗಿದೆ. ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲ್ವೆ ಮಾರ್ಗದ ಅಂತಿಮ ಸಮೀಕ್ಷೆ ಪ್ರಗತಿಯಲ್ಲಿದೆ. ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಪೆಟ್ರೋಲ್ ಹಾಗೂ ಎಲ್ಪಿಜಿ ಕೊರತೆಯಾಗದಂತೆ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ’ ಎಂದು ರಾಘವೇಂದ್ರ ತಿಳಿಸಿದರು.

ಬೆಂಗಳೂರು-ಶಿವಮೊಗ್ಗ ಉಡಾನ್ ಯೋಜನೆಗೆ
‘ನಷ್ಟದ ಕಾರಣಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಜೊತೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಉಡಾನ್ (UDAN) ಯೋಜನೆಯ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಮಾರ್ಗವನ್ನು ಸೇರ್ಪಡೆಗೊಳಿಸಿ, ಶೀಘ್ರದಲ್ಲೇ ವಿಮಾನ ಸೇವೆ ಪುನರಾರಂಭಿಸಲು ಕೇಂದ್ರ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಕೆ. ಜಗದೀಶ್, ಮಾಲತೇಶ್ ಸೇರಿ ಹಲವರು ಇದ್ದರು.