ಶಿವಮೊಗ್ಗ: ‘ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ ಬಳಸಿ ಟೀಕೆ ಮಾಡಿರುವುದು ಅವರ ಹಿರಿತನಕ್ಕೆ ಮತ್ತು ವಯಸ್ಸಿಗೆ ಶೋಭೆ ತರುವುದಿಲ್ಲ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹೇಳಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಶ್ವರಪ್ಪ ಅವರಿಗೆ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಮಾತನಾಡುವ ಚಟ ಇನ್ನೂ ಹೋಗಿಲ್ಲ. ಅವರು ಅನುಭವಿ ರಾಜಕಾರಣಿ. ಆದರೆ ರಾಜಕೀಯಕ್ಕಾಗಿ ಏನೇನೋ ಮಾತನಾಡಬಾರದು ಎಂದರು.

ಸದ್ಯ ಈಶ್ವರಪ್ಪ ಅವರು ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಅನೇಕ ಕಾರ್ಯಕ್ರಮ ಆಯೋಜಿಸುತ್ತಾ, ಅವರನ್ನು ಜೊತೆಯಲ್ಲೇ ಕರೆದುಕೊಂಡು ಓಡಾಡುತ್ತಿದ್ದಾರೆ. ಇದರ ವಿರುದ್ಧ ನಮ್ಮ ಪಕ್ಷ ಎಂದಿಗೂ ಟೀಕೆ ಮಾಡಿಲ್ಲ. ಈಶ್ವರಪ್ಪ ಅವರು ಕನಿಷ್ಠ ಸೌಜನ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಕೆ.ಎಸ್.ಈಶ್ವರಪ್ಪ ಸಹೃದಯ ಮನುಷ್ಯ ಆದರೆ ಮಾಧ್ಯಮ ಹಾಗೂ ವೇದಿಕೆಗಳು ಕಂಡರೆ ಅವರ ನಾಲಗೆ ನಿಲ್ಲುವುದಿಲ್ಲ. ತಮಗೆ ತೋಚಿದಂತೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಅವರನ್ನು ಟೀಕೆ ಮಾಡುತ್ತಿದ್ದರು. ಈಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸುತ್ತಿದ್ದಾರೆ.
– ಕಿಮ್ಮನೆ ರತ್ನಾಕರ್, ಮಾಜಿ ಸಚಿವ

