SHIVAMOGGA LIVE NEWS| 17 DECEMBER 2022
ಶಿವಮೊಗ್ಗ : ಹೊಸ ಶಿಕ್ಷಣ ನೀತಿ (education policy) ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ ಎಂದು ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಮಹಾವೀರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ (education policy) ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕೊರತೆ ಮುಂತಾದ ಸಮಸ್ಯೆಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (education policy) ಜಾರಿಯಿಂದ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರಗಳು ಈ ದ್ವಂದ್ವ ನೀತಿ ಕೈಬಿಡಬೇಕು ಎಂದು ಆಗ್ರಹಿಸಿದರು.
ಇದೆ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಪಿ.ದಿನೇಶ್ ಅವರು, ನೂತನ ಶಿಕ್ಷಣ ನೀತಿಯನ್ನು ಸರ್ಕಾರ ಸಮಪರ್ಕವಾಗಿ ಜಾರಿಗೊಳಿಸಿಲ್ಲ. ಹಾಗಾಗಿ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನುವುದು ಉಪನ್ಯಾಸಕರಿಗೆ ಗೊಂದಲ ಉಂಟಾಗುತ್ತಿದೆ. ಇದೆ ರೀತಿ ಹಲವು ಗೊಂದಲಗಳಾಗುತ್ತಿವೆ. ವಿದ್ಯಾರ್ಥಿಗಳು ಕೊನೆಗೂ ಈ ವಿಚಾರದಲ್ಲಿ ಎಚ್ಚೆತ್ತುಕೊಂಡು ಹೋರಾಟ ಆರಂಭಿಸಿದ್ದೀರ. ಇದು ನಿರಂತರವಾಗಿ ಮುಂದುವರೆಯಬೇಕು ಎಂದರು.
ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ್ ಮಾತನಾಡಿ, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಯನ್ನು ಮರು ಜಾರಿಗೊಳಿಸಬೇಕು. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನ ನೀಡಬೇಕು. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಬೇಕು. ವಸತಿ ಶಾಲೆಗಳ ಸಮಸ್ಯೆಗಳನ್ನು ಪರಿಹರಿಸಬೇಕು, ವಾರ್ಷಿಕ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ಶ್ರೀಜಿತ್, ರವಿ ಕಾಟಿಕೆರೆ, ಚರಣ್, ಹರ್ಷಿತ್, ಚಂದ್ರೋಜಿ ರಾವ್, ವರುಣ್ ಪಂಡಿತ್, ರವಿ, ಶಿವು, ಉಲಾಸ್, ಪ್ರದೀಪ ಸೇರಿದಂತೆ ಹಲವು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?