ಶಿವಮೊಗ್ಗದ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮತ್ತು ಅಪರಾಧ ಚಟುವಟಿಕೆ ಏರಿಕೆಯಾಗಿದೆ. ಪೊಲೀಸ್ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇವುಗಳನ್ನು ನಿಯಂತ್ರಿಸುವಲ್ಲಿ ಗೃಹ ಸಚಿವರು ವಿಫಲವಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಬಸ್ ನಿಲ್ದಾಣದ ಮುಂಭಾಗದ ಅಶೋಕ ಸರ್ಕಲ್’ನಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗಾಂಜಾ, ಇಸ್ಪೀಟು, ಕಳ್ಳತನ, ದರೋಡೆ
ಕಳೆದ ಕೆಲವು ತಿಂಗಳಿಂದ ಈಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಹೇರಳವಾಗಿ ಸಿಗುತ್ತಿದೆ. ಇಸ್ಪೀಟ್ ದಂಧೆ, ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಳವಾಗಿದೆ. ಇದರ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಇದು ಗೃಹ ಸಚಿವರ ವೈಫಲ್ಯಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾದ್ಯಂತ ಗಾಂಜಾ ಸಿಗುತ್ತಿದೆ. ಆಂಧ್ರದಿಂದಲೂ ಗಾಂಜಾ ಬರುತ್ತಿದೆ. ಇವುಗಳನ್ನು ನಿಯಂತ್ರಿಸಲು ಪೊಲೀಸರಿಗೆ ಸೂಕ್ತ ಸೌಲಭ್ಯ ಒದಗಿಸುತ್ತಿಲ್ಲ. ಇದು ಗೃಹ ಸಚಿವರ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಗಾಂಜಾ ಹಾವಳಿ ಹೆಚ್ಚಳವಾಗಿದೆ. ಇದೆ ಕಾರಣಕ್ಕೆ ಮಕ್ಕಳನ್ನು ಕಾಲೇಜು ಬಿಡಿಸಲು ಪೋಷಕರು ಮುಂದಾಗಿದ್ದಾರೆ. ಈ ಸಂಬಂಧ ತಮಗೆ ದೂರು ನೀಡುತ್ತಿದ್ದಾರೆ. ಗಾಂಜಾ ಹಾವಳಿಯಿಂದಾಗಿ ಶಿವಮೊಗ್ಗದಲ್ಲಿ ಕೊಲೆ, ದರೋಡೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವರ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಿಪಡಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣ ನೆಲೆಸುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಆರ್.ಪ್ರಸನ್ನಕುಮಾರ್, ಹೆಚ್.ಎಂ.ಚಂದ್ರಶೇಖರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.