SHIVAMOGGA LIVE NEWS | 18 NOVEMBER 2023
SHIKARIPURA : ಹೋರಿ ಹಬ್ಬ ನಡೆಸಲು ಪೊಲೀಸ್ ಇಲಾಖೆ ಅಡ್ಡಿ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಗ್ರಾಮಸ್ಥರು ಶಿಕಾರಿಪುರ ಗ್ರಾಮಾಂತರ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.
ಮದಗ ಹಾರನಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಸಂದರ್ಭ ಹೋರಿ ಹಬ್ಬ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಪೊಲೀಸ್ ಇಲಾಖೆ ಹೋರಿ ಹಬ್ಬಕ್ಕೆ ಅಡ್ಡಿ ಉಂಟು ಮಾಡಿದೆ ಎಂದು ಆರೋಪಿಸಿ ಗ್ರಾಮಸ್ಥರು ಸಂಸದ ರಾಘವೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸಂಸದ ರಾಘವೇಂದ್ರ ಹೇಳಿದ್ದೇನು?
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರ ಮತ್ತು ಜನರ ಮಧ್ಯೆ ಸೇತುವೆಯಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಲಾಠಿ ಎತ್ತುವುದಷ್ಟೆ ಪೊಲೀಸರ ಕೆಲಸವಲ್ಲ. ಹಬ್ಬ ಆಚರಣೆ ಸಂಬಂಧ ಅನುಮತಿಗಾಗಿ ರೈತರು ಇನ್ಮುಂದೆ ಪೊಲೀಸ್ ಠಾಣೆಗೆ ಬರುವುದಿಲ್ಲ. ಏಕ ಗವಾಕ್ಷಿ ವ್ಯವಸ್ಥೆ ಮೂಲಕ ಹಬ್ಬ ಮಾಡಲು ಅವಕಾಶ ಕಲ್ಪಿಸಬೇಕು. ಆದರೆ ಇವತ್ತಿನ ಹಬ್ಬ ತಡೆದಿದ್ದು ಅಕ್ಷಮ್ಯ. ರೈತರ ಮಕ್ಕಳಿಗೆ ತೊಂದರೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಶಿಕಾರಿಪುರ ಬಿಜೆಪಿ ಮಂಡಲದ ಅಧ್ಯಕ್ಷ ವೀರೇಂದ್ರ ಪಾಟೀಲ್, ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್, ಸತೀಶ್, ರುದ್ರೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಬಾಂಬೆ ಬ್ಲಡ್ಗಾಗಿ 6 ಗಂಟೆ ಪರಿಶ್ರಮ, ಏನಿದು ಆಪರೇಷನ್?
