SHIVAMOGGA LIVE NEWS | 27 APRIL 2023
SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.
ಎರಡು ವಿಶೇಷ ವಿಮಾನ
ರಾಹುಲ್ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್ ಗಾಂಧಿ ಮತ್ತು ಅವರ ಭದ್ರತಾ ಸಿಬ್ಬಂದಿ, ಕಚೇರಿ ಸಿಬ್ಬಂದಿ ಪ್ರತ್ಯೇಕ ವಿಮಾನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಸ್ವಾಗತ, ಚರ್ಚೆ, ಸಲಹೆ
ರಾಹುಲ್ ಗಾಂಧಿ ಅವರ ಭೇಟಿಗೆ ಶಿವಮೊಗ್ಗ ಕಾಂಗ್ರೆಸ್ನಿಂದ 135 ಮುಖಂಡರಿಗೆ ಅವಕಾಶವಿತ್ತು. ಕೊನೆಗೆ 30 ಮಂದಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಕಾಂಗ್ರೆಸ್ನ ಎಲ್ಲಾ ವಿಭಾಗದ ಪ್ರಮುಖರನ್ನು ಭೇಟಿಯಾದ ರಾಹುಲ್ ಗಾಂಧಿ ಅವರು, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಬೇಕು ಎಂದು ಸಲಹೆ ನೀಡಿದರು.
ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕ ಸಭೆ
ಇನ್ನು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಜೊತೆಗೆ ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಶಿವಮೊಗ್ಗ ಕ್ಷೇತ್ರದ ಹೆಚ್.ಸಿ.ಯೋಗೇಶ್, ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್, ಭದ್ರಾವತಿಯ ಬಿ.ಕೆ.ಸಂಗಮೇಶ್ವರ್, ಸಾಗರದ ಬೇಳೂರು ಗೋಪಾಲಕೃಷ್ಣ, ಶಿಕಾರಿಪುರದ ಮಾಲ್ತೇಶ್, ಶಿವಮೊಗ್ಗ ಗ್ರಾಮಾಂತರದ ಡಾ.ಶ್ರೀನಿವಾಸ ಕರಿಯಣ್ಣ ಅವರ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕ ಮಂಜುನಾಥ ಗೌಡ ಸೇರಿದಂತೆ ಕೆಲವು ಪ್ರಮುಖರು ಇದ್ದರು.
ಸೊರಬ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಉಡುಪಿ ಉಸ್ತುವಾರಿ ಆಗಿರುವುದರಿಂದ ರಾಹುಲ್ ಗಾಂಧಿ ಭೇಟಿ ವೇಳೆ ಅವರು ಇರಲಿಲ್ಲ.
ಇದನ್ನೂ ಓದಿ – ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ
ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗಕ್ಕೆ ಬರಲಿಲ್ಲ. ಮುಖಂಡರ ಜೊತೆ ಸಭೆ ಬಳಿಕ ರಾಹುಲ್ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಿದರು.