ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ಮಕ್ಕಳಿಗೆ ಹಾಲಿನ ಜೊತೆಗೆ ಬ್ರೆಡ್ ವಿತರಣೆ ಮಾಡಿದರೆ ಅನುಕೂಲವಾಗಲಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು ಎಂದು ಶಶಿಕುಮಾರ್ ಗೌಡ ಒತ್ತಾಯಿಸಿದರು.
ಮತ್ತೊಂದೆಡೆ ಬಿಸಿ ಊಟ ತಯಾರಿಗೆ ಸಿಲಿಂಡರ್ ಬಳಕೆ ಮಾಡಲಾಗುತ್ತದೆ. ಶಾಲೆಯಲ್ಲಿ ಮಕ್ಕಳು ಇರುವ ಸಂದರ್ಭ ಅನಿಲ ಸೋರಿಕೆಯಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಭದ್ರಾವತಿಯ ಜಂಕ್ಷನ್ ಸಮೀಪ ಶಾಲೆಯೊಂದರಲ್ಲಿ ಇತ್ತೀಚೆಗೆ ಅನಿಲ ಸೋರಿಕೆಯಾಗಿ ಆತಂಕಕ್ಕೆ ಕಾರಣವಾಗಿತ್ತು. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.