ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020
ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿಯೂ ಕೈಗಾರಿಕಾ ವಸಾಹತು ಪ್ರದೇಶವನ್ನು ಆರಂಭಿಸಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಕಾಸಿಯಾ (ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ) ರಾಜ್ಯಾಧ್ಯಕ್ಷ ಕೆ.ಬಿ.ಅರಸಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ರಾಜ್ಯ ಸರ್ಕಾರ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ರಾಜ್ಯ ಮಟ್ಟದ ಪ್ರಮುಖ ಸಂಘವಾಗಿದ್ದು, ಕೈಗಾರಿಕೆಗಳ ಸ್ಥಾಪನೆ ಮತ್ತು ಉತ್ಪಾದನೆಯ ಮೂಲಕ ರಾಜ್ಯದ ಅಭಿವೃದ್ದಿಗೆ ಕಾರಣವಾಗಿದೆ. ಉದ್ಯೋಗಕ್ಕೂ ಒತ್ತುಕೊಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ಸಣ್ಣ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.
ಉತ್ಪಾದನೆಯಲ್ಲಿ ಬೆಳವಣಿಗೆ ಉಳಿಸಿಕೊಳ್ಳಬೇಕು
ಶಿವಮೊಗ್ಗ ಜಿಲ್ಲೆಯು ಕೈಗಾರಿಕಾ ಮೂಲ ಸೌಕರ್ಯದ ಕೊರತೆ ಎದುರಿಸುತ್ತಿದೆ. ಉತ್ಪಾದನೆಯಲ್ಲಿ ಬೆಳವಣಿಗೆಯನ್ನು ಉಳಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ರಾಜ್ಯ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ ಎಂದರು.
ಕೈಗಾರಿಕೆಗಳ ವಿಸ್ತರಣೆಗೆ ಸರ್ಕಾರ ಅಗತ್ಯ ಜಾಗ ನೀಡಬೇಕು, ಫೌಂಡರಿ ಕ್ಲಸ್ಟರ್ ಸ್ಥಾಪನೆಗೆ ಸಹಾಯಧನ ನೀಡಬೇಕು, ಮಾಚೇನಹಳ್ಳಿ- ನಿಧಿಗೆ ರಸ್ತೆಯನ್ನು ಅಭಿವೃದ್ದಿಪಡಿಸಬೇಕು, ರಫ್ತು ಬೆಳವಣಿಗೆಗೆ ಅಗತ್ಯ ವಾತಾವರಣ ಮೂಡಿಸಬೇಕು. ಎಸ್.ಎಂ.ಇ. ಗಳ ಕಾರ್ಮಿಕರಿಗೆ ವಸತಿ ಹಾಗೂ ಇತರೆ ಸೌಲಭ್ಯಗಳ ಟೌನ್ಶಿಪ್ ಅಭಿವೃದ್ದಿಪಡಿಸಬೇಕು. ಜಿಲ್ಲೆಯ ಅಭಿವೃದ್ದಿಗಾಗಿ ಆನ್ಸಿಲರಿ ಘಟಕಗಳ ಅಭಿವೃದ್ದಿಗಾಗಿ ಮಾಚೇನಹಳ್ಳಿ – ನಿದಿಗೆಗೆ ಹೊಂದಿಕೊಂಡಂತೆ ಇರುವ ಸುಮಾರು ೧೪೦ ಎಕರೆ ಜಾಗವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.
15 ಸಾವಿರ ಮಂದಿಗೆ ಕೆಲಸ ಸಿಗುತ್ತೆ
ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿಯೂ ಕೈಗಾರಿಕಾ ವಸಾಹತು ಪ್ರದೇಶವನ್ನು ಆರಂಭಿಸಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕು. ಶಿವಮೊಗ್ಗ ಜಿಲ್ಲೆಯ ಪ್ರಮುಖ ಕಾರ್ಖಾನೆಗಳಾದ ಎಂಪಿಎಂ ಮತ್ತು ವಿಐಎಸ್ಎಲ್ ಕಾರ್ಖಾನೆಗಳನ್ನು ಪುನರ್ ಆರಂಭಿಸಿದರೆ ಸುಮಾರು 15 ಸಾವಿರ ಜನರಿಗೆ ಉದ್ಯೋಗ ದೊರಕಲಿದೆ ಇದರ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಎನ್.ಆರ್.ಜಗದೀಶ್, ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಎ.ರಮೇಶ್ ಹೆಗ್ಡೆ, ಕಾಸಿಯಾ ನಿರ್ದೇಶಕ ವಿಶ್ವೇಶ್ವರಯ್ಯ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]