ಭದ್ರಾವತಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ತಾಲ್ಲೂಕು ಘಟಕದಿಂದ ಹಳೆ ನಗರದ ವೀರಶೈವ ಸಭಾಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಮಾವೇಶ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಸಂವಿಧಾನ ಅಶಯ ಕುರಿತು ತಿಳಿಸಿದರು.
ಮಿನಿಸ್ಟರ್ ಏನೆಲ್ಲ ಹೇಳಿದರು?

ಪ್ರತಿಯೊಂದನ್ನೂ ಹೋರಾಟ, ಸಂಘರ್ಷದ ಮೂಲಕ ಪಡೆದುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಹಾಗೂ ನೆಮ್ಮದಿಯಿಂದ ಬದುಕುವಂತಾಗಿದೆ. ಒಂದು ವೇಳೆ ಸಂವಿಧಾನ ರಚನೆಯಾಗದಿದ್ದಲ್ಲಿ ಈ ದೇಶದ ಜನರ ಸ್ಥಿತಿ ಕಲ್ಪಿಸಿಕೊಳ್ಳಲೂ ಅಸಾಧ್ಯವಾಗುತ್ತಿತ್ತು ಎಂದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ನೀಡಿದ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಕಾಣಲು ಸಾಧ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ಮನೆ-ಮನೆಗಳಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾವೆಲ್ಲರೂ ಸಂವಿಧಾನವನ್ನು ಏಕೆ ಓದಬೇಕು ಎಂಬುದನ್ನು ಅರ್ಥ ಮಾಡಿಕೊಂಡಾಗ ಮಾತ್ರ ಸಂವಿಧಾನ ವಿರೋಧಿಸುವವರಿಗೆ ಉತ್ತರ ನೀಡಲು ಸಾಧ್ಯ. ಜನರು ಭಗವದ್ಗೀತೆ, ರಾಮಾಯಣ, ಮಹಾಭಾರತ ಓದುವ ಬದಲು ಸಂವಿಧಾನದ ಪುಸ್ತಕವನ್ನು ಓದಬೇಕು.
ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿ ಮಠ


ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಆರ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಹೆಚ್.ಪಿ.ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ.ಬಿ.ಕೃಷ್ಣಪ್ಪ, ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಹಿಂದುಳಿದ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ನಗರಸಭೆ ಅಧ್ಯಕ್ಷ ಎಂ.ಮಣಿ, ಹಿರಿಯ ಸದಸ್ಯ ಬಿ.ಕೆ.ಮೋಹನ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?