ಶಿವಮೊಗ್ಗ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ (Dam) ತುಂಗ-ಭದ್ರಾ ನದಿಗೆ 5800 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ. ಫೆ.5 ರಿಂದ 11ರವರೆಗೆ ನೀರು ಹರಿಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಾದೇಶಿಕ ಆಯುಕ್ತರ ಆದೇಶದ ಹಿನ್ನೆಲೆ ಫೆ.5ರ ರಾತ್ರಿ 100 ಕ್ಯೂಸೆಕ್, ಫೆ.6 ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್ನಂತೆ ಒಟ್ಟು 5800 ಕ್ಯೂಸೆಕ್ ನೀರನ್ನು ಭದ್ರಾ ನದಿಗೆ ಹರಿಸಲಾಗುತ್ತಿದೆ.

ಜಲಾಶಯದಿಂದ ನದಿಗೆ ನೀರು ಹರಿಸುತ್ತಿರುವುದರಿಂದ ಸಾರ್ವಜನಿಕರು ಮತ್ತು ರೈತರು ನದಿ ಪಾತ್ರದಲ್ಲಿ ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್ ರವಿಚಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಹೆಲ್ಪ್ಲೈನ್ ಶುರು, ವಾಟ್ಸಪ್ನಲ್ಲೇ ದಾಖಲಿಸಬಹುದು ದೂರು