ಹುಲಿಕಲ್‌ ಘಾಟಿ: ಸಂಚಾರ ಪುನಾರಂಭ, ಲಘು ವಾಹನಗಳಿಗೆ ಮಾತ್ರ ಅವಕಾಶ, ಏನೆಲ್ಲ ಎಚ್ಚರಿಕೆ ವಹಿಸಲಾಗಿದೆ?

ಶಿವಮೊಗ್ಗ: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ವ್ಯಾಪ್ತಿಯಲ್ಲಿ ಜೂನ್ 12ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಆದೇಶ ಹೊರಡಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭೂಕುಸಿತದಿಂದಾಗಿ ವಾಹನ ಸಂಚಾರ ರದ್ದಾಗಿತ್ತು

ಏಪ್ರಿಲ್ 9ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ರಸ್ತೆಯ ಕೆಳಭಾಗದಲ್ಲಿ ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿಕಟ್ಟೆಯಿಂದ ಹೊಸಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿತ್ತು.

Hulikal-Ghat-Reopened-For-vehicles

ತಡೆಗೋಡೆ, ಲೀನ್‌ ಕಾಂಕ್ರೀಟ್‌

ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ, ಪೊಲೀಸ್ ಹಾಗೂ ಸಾರಿಗೆ ಅಧಿಕಾರಿಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Shivamogga Live Promotion

ಎಚ್ಚರಿಕೆ ಫಲಕಗಳು, ಕ್ಯಾಟ್‌ ಐ, ಸೋಲಾರ್‌ ಸ್ಟಡ್ಸ್‌

ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಯಾಗಿ ತಡೆಗೋಡೆ, ಎಚ್ಚರಿಕೆ ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ. ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ಕ್ಯಾಟ್ ಐ ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. ಮೋಟಾರು ವಾಹನ ಕಾಯ್ದೆ ಅನ್ವಯ ಈ ಹಿಂದೆ ವಿಧಿಸಲಾಗಿದ್ದ ಸಂಪೂರ್ಣ ನಿಷೇಧದ ಆದೇಶವನ್ನು ರದ್ದುಗೊಳಿಸಿ, ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಸದ್ಯ ಅನುಮತಿ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.