ತುಮರಿ: ಸಮೀಪದ ಕಾರಣಿ ಗ್ರಾಮದ ಮಂಜಪ್ಪ ಎಂಬುವವರ ಸಾಕು ನಾಯಿಯ ಮೇಲೆ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿದೆ. ಈ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಮನೆಯ ಆವರಣಕ್ಕೆ ನುಗ್ಗಿದ ಚಿರತೆಯು ನಾಯಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ನಾಯಿ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಇದೇ ಗ್ರಾಮದ ರೈತರೊಬ್ಬರ ನಾಯಿಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಕೂಡಲೇ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
