ಸಾಗರ: ತಾಲೂಕಿನಾದ್ಯಂತ ಮಳೆಯ ಅಬ್ಬರ ತೀವ್ರವಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜುಲೈ 8ರಂದು ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಆದೇಶಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ತಹಶೀಲ್ದಾರ್ ಆದೇಶದಲ್ಲಿ ಏನಿದೆ?
ಸಾಗರ ತಾಲೂಕಿನಲ್ಲಿ ಪ್ರಸ್ತುತ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಜುಲೈ 8ರಂದು ಸಾಗರ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ (ಪಿ.ಯು.) ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ರಜಾ ದಿನದಂದು ನಡೆಯಬೇಕಾಗಿದ್ದ ತರಗತಿಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ. ಇನ್ನು, ಭಾರಿ ಮಳೆಯಿಂದಾಗಿ ಸಾಗರ ತಾಲೂಕಿನಲ್ಲಿ ಕಳೆ ಎರಡು ದಿನದಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.