ಶಿಕಾರಿಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ್ ಎಂ.ಎಸ್. ಅವರು ಶಿಕಾರಿಪುರದ ಸಾರ್ವಜನಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಆಸ್ಪತ್ರೆಯ ವೈದ್ಯಕೀಯ ಸೇವೆ, ಪ್ರಯೋಗಾಲಯ, ಔಷಧಿ ವಿತರಣೆ ಹಾಗೂ ಸ್ವಚ್ಛತೆಯನ್ನು ವೀಕ್ಷಿಸಿದ ಅವರು, ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ತಾಯಂದಿರು ಮತ್ತು ಮಕ್ಕಳ ಮಾತನಾಡಿ ಕುಂದುಕೊರತೆ ಆಲಿಸಿದರು. ರೋಗಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ತಪಾಸಣೆ ನಡೆಸಿದ ನ್ಯಾಯಾಧೀಶರು, ಆರೈಕೆದಾರರ ಭೋಜನಾಲಯದ ವ್ಯವಸ್ಥೆಯನ್ನೂ ಪರಿಶೀಲಿಸಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಬಳಿಕ ಶಿಕಾರಿಪುರ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಬಿ.ಎನ್. ರಮೇಶ್ ಬಾಬು, ಸದಸ್ಯ ಕಾರ್ಯದರ್ಶಿ ರಶ್ಮಿ ಎಸ್. ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಧನಂಜಯ ಹೆಗಡೆ ಅವರೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಲೋಕ ಅದಾಲತ್ ತಯಾರಿ, ಕೆರೆಗಳ ಪುನರುಜ್ಜೀವನ ಮತ್ತು ಸಸಿ ನೆಡುವ ಅಭಿಯಾನದ ಪ್ರಗತಿ ಪರಿಶೀಲಿಸಿದರು. ನಂತರ ವಕೀಲರ ಸಂಘಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹಾಗೂ ವಿಶೇಷ ಲೋಕ ಅದಾಲತ್ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಇನ್ನು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ದೇಶದ ಪ್ರಗತಿಗೆ ಶ್ರಮಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರು ಸಭೆಯ ಅಧ್ಯಕ್ಷತೆ ವಹಿಸಿದ್ದರು.