ಶಿವಮೊಗ್ಗ: ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಎಂಬ ಗಾದೆಯಂತೆ, ಕಾಡನ್ನು ಕಾಯಬೇಕಾದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಸಾಗುವಾನಿ ಮರ ಕಡಿದು ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ತಾಲೂಕಿನ ಉಂಬ್ಳೆಬೈಲು ವಲಯದಲ್ಲಿ ಘಟನೆ ನಡೆದಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಸಾಗುವಾನಿ ಮರವನ್ನು ಕಡಿದು ಸಾಗಿಸುವ ಉದ್ದೇಶದಿಂದ ಅರಣ್ಯದ ಒಳಗೆ ಬಚ್ಚಿಡಲಾಗಿತ್ತು. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೇ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಕಡಿದು ಸಿದ್ಧಪಡಿಸಲಾಗಿದ್ದ ಸಾಗುವಾನಿ ಮರವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಮೊದಲಲ್ಲ
ಉಂಬ್ಳೆಬೈಲು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಮರ ಕಡಿತ ಹಾಗೂ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬೀಳುತ್ತಿರುವುದು ಇದು ಮೊದಲಲ್ಲ. ಕೆಲವು ವರ್ಷದ ಹಿಂದೆ ಮರಗಳನ್ನು ಕಡಿದು, ತುಂಡುಗಳನ್ನಾಗಿ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಇಲಾಖೆಯ ಹಿರಿಯ ಅಧಿಕಾರಿಗಳೇ ದಾಳಿ ನಡೆಸಿ ಹಿಡಿದಿದ್ದರು. ಈಗ ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
