SHIVAMOGGA LIVE NEWS | 2 SEPTEMBER 2023
SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ ಹಿಡಿಯಬೇಕು. ರಾಜ್ಯ ಸರ್ಕಾರ ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು (drought prone) ಘೋಷಿಸಬೇಕು. ರೈತರ ಎಲ್ಲಾ ಸಾಲಗಳನ್ನು ಈ ವರ್ಷ ಕೈ ಬಿಟ್ಟು ರೈತರನ್ನು ಋಣಮುಕ್ತರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ 27 ಮಹಿಳೆಯರಿಗೆ ವಂಚಿಸಿದ ರಿಕವರಿ ಆಫೀಸರ್
ರೈತ ಸಂಘದ ರಾಜ್ಯ ಸಂಚಾಲಕ ಉಮೇಶ್ ಪಾಟೀಲ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮಳೆ ಇಲ್ಲದೇ ರೈತರು ಬಿತ್ತನೆ ಮಾಡಿದ ಮೆಕ್ಕೆಜೋಳ, ನಾಟಿ ಮಾಡಿದ ಭತ್ತದ ಬೆಳೆಗಳು ಒಣಗಿ ಹಾಳಾಗುತ್ತಿವೆ. ಮೆಕ್ಕೆಜೋಳ ಬೆಳೆದ ರೈತರಿಗೆ ಪ್ರತೀ ಎಕರೆಗೆ 25 ಸಾವಿರ ರೂ., ಹಾಗೂ ಭತ್ತದ ಭೂಮಿಗೆ ಪ್ರತಿ ಎಕರೆಗೆ 30 ಸಾವಿರ ರೂ., ಬೆಳೆ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕು. ರೈತರ ಪಂಪ್ಸೆಟ್ಗೆ ಮೆಸ್ಕಾಂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು. ರೈತರೊಂದಿಗೆ ಕಣ್ಣಾಮುಚ್ಚಾಲೆ ಆಡುವುದು ಬಿಟ್ಟು ಹಗಲು ವೇಳೆಯಲ್ಲಿ 3 ಫೇಸ್ ವಿದ್ಯುತ್ನ್ನು 7 ತಾಸು ನೀಡಬೇಕು ಎಂದು ಆಗ್ರಹಿಸಿದರು.
2022 ನೇ ಸಾಲಿನಲ್ಲಿ ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ವಿಮೆ ಕಟ್ಟಿದ ರೈತರ ಖಾತೆಗೆ ಕೂಡಲೇ ಬೆಳೆವಿಮೆ ಹಣ ಜಮಾ ಮಾಡಬೇಕು. ರೈತರ ಬಗ್ಗೆ ಅರಿವನ್ನು ಹೊಂದಿರುವ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ – ಶಿವಮೊಗ್ಗ ಫ್ರೀಡಂ ಪಾರ್ಕ್ನಲ್ಲಿ 112 ಪೊಲೀಸರ ಕರ್ತವ್ಯ ಪ್ರಜ್ಞೆಯಿಂದ ಉಳಿಯಿತು ಅಪ್ರಾಪ್ತೆಯ ಪ್ರಾಣ, ಆಗಿದ್ದೇನು?
ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಉಪಾಧ್ಯಕ್ಷ ನಾಗರಾಜ ಬೆಣ್ಣಿಗೇರಿ, ಪ್ರಧಾನ ಕಾರ್ಯದರ್ಶಿ ಮೇಘರಾಜ ಬೆಟ್ಟದಕೂರ್ಲಿ, ರೈತ ಮುಖಂಡರಾದ ಸುರೇಶ್ ನಾಯ್ಕ್, ಹನುಮಂತಪ್ಪ ಬಾವಿಕಟ್ಟಿ, ಶಿವಪ್ಪ ಹುಣಸವಳ್ಳಿ, ಬಾಷಾಸಾಬ್ ಆರೇಕೊಪ್ಪ, ವೀರನಗೌಡ ಗಿಣಿವಾಲ, ಈರಮ್ಮ ಆನವಟ್ಟಿ, ನಾಗಮ್ಮ ಆನವಟ್ಟಿ, ಡಿಎಸ್ಎಸ್ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ತಾಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಸೇರಿದಂತೆ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200