SHIMOGA : ಡಿ.29ರಂದು ಕುಪ್ಪಳಿಯ ಹೇಮಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಬಂಗಾಳಿ ಸಾಹಿತಿ ಶೀರ್ಷೇಂಧು ಮುಖ್ಯೋಪಾಧ್ಯಾಯ ಅವರಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕುಪ್ಪಳಿಯಲ್ಲಿ ಸಭಾ ಕಾರ್ಯಕ್ರಮ
ಅಂದು ಬೆಳಗ್ಗೆ 10 ಗಂಟೆಗೆ ಕವಿಶೈಲದಲ್ಲಿ ಕವಿನಮನೆಗೆ ಅತಿಥಿಗಳು ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ಪ್ರಧಾನ ಭಾಷಣ ಮಾಡಲಿದ್ದಾರೆ. ನೆಫ್ರೋ ಯುರೋಲಜಿ ಸಂಸ್ಥೆಯ ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ
ಅಂದು ಸಂಜೆ 7ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗದ ನಮ್ ಟೀಮ್ ತಂಡದವರಿಂದ ವಾಲ್ಮೀಕಿಯ ಭಾಗ್ಯ ನಾಟಕ ಪ್ರದರ್ಶನವಿರಲಿದೆ. ಇದೇ ಸಮಾರಂಭದಲ್ಲಿ ಕುವೆಂಪುರವರ ಮೊದಲ ಪುಸ್ತಕ ಹಾಗೂ ಶೀರ್ಷೇಂಧು ಮುಖ್ಯೋಪಾಧ್ಯಾಯರವರ ಸಾಮೀಪ್ಯ (ಬಂಗಾಳಿ) ಪುಸ್ತಕ ಬಿಡುಗಡೆಯಾಗಲಿದೆ.
ರಾಷ್ಟ್ರಮಟ್ಟದ ಕಾರ್ಯಾಗಾರ
ಡಿ.29ರಿಂದ ಜನವರಿ 01ರವರೆಗೆ ರವರೆಗೆ ಕುಪ್ಪಳಿಯಲ್ಲಿರುವ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಲಿದೆ. ಡಾ. ಬಿ.ಎಂ. ಪುಟ್ಟಯ್ಯ ಈ ಶಿಬಿರದ ನಿರ್ದೇಶಕರಾಗಿದ್ದಾರೆ.
ಇದನ್ನೂ ಓದಿ – ಮಹಿಳೆಯರಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕ್ಯಾಂಪ್, ಯಾವಾಗ?