ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಹತ್ಯೆ ಮಾಡಿದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಫೆ.20ರಂದು ರಾತ್ರಿ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಾಯಿಯಿಂದ ದೂರು
ಹರ್ಷನ ಹತ್ಯೆ ಸಂಬಂಧ ಆತನ ತಾಯಿ ದೂರು ನೀಡಿದ್ದರು. ‘ಭಜರಂಗದಳದ ಕಾರ್ಯಕರ್ತನಾಗಿ ಹಿಂದುತ್ವ, ಗೋ ರಕ್ಷಣೆಯಂತಹ ವಿಚಾರಗಳಲ್ಲಿ ತೊಡಗಿ ಕೊಂಡಿದ್ದನು. ಇದರಿಂದಾಗಿ ತನಗೆ ಜೀವಬೆದರಿಕೆ ಇದೆ’ ಎಂದು ಹೇಳಿಕೊಂಡಿದ್ದ.
ಫೆ.20ರಂದು ರಾತ್ರಿ ಹೊಟೇಲ್’ನಲ್ಲಿ ಊಟ ಮಾಡಿ ಬರುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದ ಹರ್ಷನ ವಿರುದ್ಧ ದಾಳಿಯಾಗಿದೆ. ಎನ್.ಟಿ.ರಸ್ತೆ ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತಿ ಕಾಲೋನಿ ಕ್ರಾಸ್’ನ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೂವರು ಅರೆಸ್ಟ್
‘ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಇನ್ನು, ‘ಮೂವರನ್ನು ಬಂಧಿಸಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.