ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021
ಸ್ಮಶಾನ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಅಲ್ಲದೆ ಗುದ್ದಲಿ ಪೂಜೆಗೆ ಬಂದವರನ್ನು ಬರಿಗೈಯಲ್ಲಿ ಹಿಂದಕ್ಕೆ ಕಳುಹಿಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಅಬ್ಬರಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಎರಡು ಎಕರೆಯಲ್ಲಿ ಸ್ಮಶಾನವಿದೆ. ಇದೆ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಇದರ ಗುದ್ದಲಿ ಪೂಜೆಗೆ ಸಿದ್ಧತೆ ಮಾಡಿಕೊಳಲಾಗಿತ್ತು.
ರೊಚ್ಚಿಗೆದ್ದ ಗ್ರಾಮಸ್ಥರು
ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನಡೆ ಅಬ್ಬರಗಟ್ಟೆ ಗ್ರಾಮಸ್ಥರನ್ನು ಕೆರಳಿಸಿತ್ತು. ಸ್ಮಶಾನ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗುದ್ದಲಿ ಪೂಜೆ ನೆರವೇರಿಸಲು ಬಂದಾಗ ಪ್ರತಿಭಟಿಸಿದರು. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ, ಸಿಬ್ಬಂದಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದರು.
ಸಮಾಧಾನಪಡಿಸಿದ ಪೊಲೀಸ್
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಗ್ರಾಮಸ್ಥರನ್ನು ಸಮಾಧಾನಪಡಿಸಿದರು. ಗ್ರಾಮಸ್ಥರ ವಿರೋಧದ ನಡುವೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸುವುದು ಸರಿಯಲ್ಲ ಎಂದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ತಿಳಿವಳಿಕೆ ಹೇಳಿದರು.
ಒತ್ತುವರಿ ತೆರವು ಮಾಡಲಿ
ಗ್ರಾಮ ಠಾಣಾಗೆ ಸೇರಿದ ಆರು ಎಕರೆ ಜಾಗದಲ್ಲಿ ಎರಡು ಎಕರೆಯಲ್ಲಿ ಸ್ಮಶಾನವಿದೆ. ಇನ್ನುಳಿದ ನಾಲ್ಕು ಎಕರೆ ಒತ್ತುವರಿಯಾಗಿದೆ. ಪ್ರಭಾವಿಗಳಿಂದ ಒತ್ತುವರಿಯಾದ ಜಾಗವನ್ನು ತೆರವು ಮಾಡಿ, ಅಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸುವಂತೆ ಅಬ್ಬರಗಟ್ಟೆ ಗ್ರಾಮಸ್ಥರು ಆಗ್ರಹಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ಇಂತಹ ಘಟನೆಗಳು ನಿಮ್ಮೂರಲ್ಲಿ ನಡೆದರೆ ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]